ಢಾಕಾ:ಪ್ರವಾದಿ ಮಹಮ್ಮದರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಸಂಬಂಧಿಸಿದ ವಿವಾದ ಭಾರತದ ಆಂತರಿಕ ವಿಚಾರ ಎಂದು ಬಾಂಗ್ಲಾದೇಶದ ಮಾಹಿತಿ ಮತ್ತು ಪ್ರಸಾರ ಖಾತೆಯ ಸಚಿವ ಹಸನ್ ಮಹಮೂದ್ ಹೇಳಿದ್ದಾರೆ.
ಪ್ರವಾದಿ ವಿರುದ್ಧದ ಹೇಳಿಕೆ ವಿಚಾರದಲ್ಲಿ ಬಾಂಗ್ಲಾದೇಶ ಸರ್ಕಾರವು ರಾಜಿ ಮಾಡಿಕೊಂಡಿದೆ ಎಂಬ ಆರೋಪಗಳನ್ನು ಅವರು ತಳ್ಳಿಹಾಕಿದ್ದು, ಅದು ಬಾಂಗ್ಲಾದೇಶದ ಗಮನ ಸೆಳೆಯುವಂಥ ವಿಷಯವೇ ಅಲ್ಲ ಎಂದು ಹೇಳಿದ್ದಾರೆ.
ಪ್ರವಾದಿ ಮಹಮ್ಮದರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ನಾಯಕರ ವಿರುದ್ಧ ಕ್ರಮ ಕೈಗೊಂಡಿರುವುದಕ್ಕೆ ಬಿಜೆಪಿಯನ್ನು ಅವರು ಅಭಿನಂದಿಸಿದ್ದಾರೆ.
ಢಾಕಾದಲ್ಲಿ ಭಾರತೀಯ ಪತ್ರಕರ್ತರ ತಂಡವೊಂದನ್ನು ಉದ್ದೇಶಿಸಿ ಮಾತನಾಡಿದ ಅವರು, ವಿವಾದಕ್ಕೆ ಸಂಬಂಧಿಸಿ ಭಾರತದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಭಾರತ ಸರ್ಕಾರವು ಇನ್ನಷ್ಟು ಕ್ರಮ ಕೈಗೊಳ್ಳುವ ಭರವಸೆ ಇದೆ ಎಂದು ಹೇಳಿದ್ದಾರೆ.