ಕೊಲಂಬೊ: ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದಲ್ಲಿ ಜನರ ಆಕ್ರೋಶಕ್ಕೆ ಗುರಿಯಾಗಿ ಪಲಾಯನ ಮಾಡಿರುವ ಅಧ್ಯಕ್ಷ ಗೊಟಬಯ ರಾಜಪಕ್ಸ ಎಲ್ಲಿಗೆ ತೆರಳಿದ್ದಾರೆ ಎಂಬುದು ಇನ್ನೂ ನಿಗೂಢವಾಗಿ ಉಳಿದಿದೆ.
ಜುಲೈ 13ರಂದು ಅಧ್ಯಕ್ಷರು ರಾಜೀನಾಮೆ ನೀಡುವುದಾಗಿ ಘೋಷಿಸಿರುವುದರಿಂದ ರಾಜಧಾನಿ ಕೊಲಂಬೊದಲ್ಲಿ ಭಾನುವಾರ ಸಹಜ ಸ್ಥಿತಿಗೆ ಮರಳುತ್ತಿದ್ದು, ಪ್ರತಿಭಟನಾಕಾರರು ಸಂಭ್ರಮ ಆಚರಿಸಿಕೊಳ್ಳುತ್ತಿದ್ದಾರೆ.
ವ್ಯಾಪಕ ಪ್ರತಿಭಟನೆ ಹಿನ್ನೆಲೆಯಲ್ಲಿ ಕೊನೆಗೂ ಮಣಿದಿದ್ದ ಗೊಟಬಯ, ಜುಲೈ 13ರಂದು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಸ್ಪೀಕರ್ ಮಹಿಂದಾ ಯಪಾ ಅಬೆವರ್ಧನ ತಿಳಿಸಿದ್ದರು.
ರಾಷ್ಟ್ರಪತಿ ಹಾಗೂ ಪ್ರಧಾನ ಮಂತ್ರಿ ಅನುಪಸ್ಥಿತಿಯಲ್ಲಿ ಸ್ಪೀಕರ್, ಹಂಗಾಮಿ ಅಧ್ಯಕ್ಷರಾಗುತ್ತಾರೆ. ಬಳಿಕ ನೂತನ ಅಧ್ಯಕ್ಷರ ಆಯ್ಕೆಗೆ ಸಂಸದರ ಚುನಾವಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಲಂಕಾ ಸ್ಥಿತಿಗತಿ ಮೇಲೆ ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಸೂಕ್ಷ್ಮ ನಿಗಾ ವಹಿಸುತ್ತಿದೆ.